ವಚನ ಮತ್ತು ವಚನಕಾರರು :👈 👉:ವಚನ ಸಾಹಿತ್ಯ Vachana Sahitya

ಕುಂಕುಮದ ಬಗ್ಗೆ ವಚನ

ಲಿಂಗವಂತನಿಗೆ ಕುಂಕುಮಧಾರಣೆ ನಿಷಿದ್ಧ.

ಕೊಂಬನೂದುವ ಹೊಲೆಯಂಗೆ
ಕುಂಕುಮ ಹಣೆಯಲ್ಲಲ್ಲದೆ ಶ್ರೀವಿಭೂತಿ ಒಪ್ಪುವುದೆ?
ಲಿಂಗಲಾಂಛನವ ತೊಟ್ಟು, ಗುರೂಪದೇಶವ ಹೇಳಿ,
ನೊಸಲಲ್ಲಿ ವಿಭೂತಿಪಟ್ಟವ ಕಟ್ಟಿದ ಬಳಿಕ,
ಮರಳಿ ಗುರುನಿಂದಕನಾಗಿ,
ಹಣೆಯಲ್ಲಿ ಕುಂಕುಮಾದಿ ತಿಲಕವ ಕೊಂಡಡವನಾ
ಕೊಂಬಿನ ಹೊಲೆಯಂಗಿಂದ ಕನಿಷ್ಠವೆಂದ,
ಕಲಿದೇವಯ್ಯ. /571 - ಶ್ರೀ ಮಡಿವಾಳ ಮಾಚಿದೇವರು

ಲಿಂಗವಂತ ಸ್ತ್ರೀಯರಿಗೂ ಕುಂಕುಮ ಧಾರಣೆ ನಿಷಿದ್ಧ

ಬಸವ ಮೊದಲಾದ ಮಹಾಪ್ರಮಥಗಣಂಗಳ ಸಮೂಹಕ್ಕೆ ಕಾರಣರಾದ,
ಮರ್ತ್ಯಲೋಕದ ಮಹಾಗಣಂಗಳ ಅಂಶೋದ್ಧಾರಕರಾದ,
ಲಿಂಗಾಚಾರ ಭಕ್ತಮಾಹೇಶ್ವರರ ಪಾಣಿಗ್ರಹಣ *ಕ್ರಿಯಾಶಕ್ತಿಯರು*
ಸದಾವಾಸ ಪರಿಯಂತರ ಇಷ್ಟಮಹಾಲಿಂಗವ
ತಮ್ಮ ಅಂಗವ ಬಿಟ್ಟು ಅಗಲಿಸಲಾಗದು.
ನಿರಂತರ ಶ್ರೀಗುರುಲಿಂಗಜಂಗಮದ ಚರಣೋದ್ಧೂಳನವನ್ನು
ಲಲಾಟದಲ್ಲಿ ತ್ರಿಪುಂಡ್ರ ರೇಖೆಗಳ ಧರಿಸಿ,
ಮಂತ್ರಸ್ಮರಣೆಯಿಂದ ಲಿಂಗಜಂಗಮಕ್ಕೆ ಪಾಕವ ಮಾಡಿ ಸಮರ್ಪಿಸಿ,
ಕುಶಬ್ದವನಳಿದು ಆಚರಿಸುವದೆ ಸತ್ಯಸದಾಚಾರ.
ಈ ಸನ್ಮಾರ್ಗವ ಬಿಟ್ಟು, ಭವಿಪ್ರಾಣಿಗಳಂತೆ ಸರ್ವಾಂಗಕ್ಕೆ ಹಚ್ಚೆಯನೂರಿಸಿಕೊಂಡು,
ಲಲಾಟದಲ್ಲಿ ಕುಂಕುಮಗಂಧದ ಬೊಟ್ಟು, ಏಕಾಂತವಾಸದಲ್ಲಿ ಹಲವು ಪ್ರಸಂಗ.
ಭವಿಜನ್ಮಾತ್ಮರು ತೊಳೆದ ಹೊದಿಕೆ, ಅವರ ಸಂಸರ್ಗ ಮೊದಲಾದ
ದುಷ್ಕೃತ್ಯವ ಮಾಡಿದಲ್ಲಿ ಕಂಡು ಸುಮ್ಮನಿರಲಾಗದು.
ಭಕ್ತಮಾಹೇಶ್ವರರು ಆ ಸ್ತ್ರೀಯರಿಗೆ ಪ್ರತಿಜ್ಞೆಯ ಮಾಡು(ಡಿಸು)ವದು.
ಅದ ಮೀರಿದಡೆ ಅವರಿಂದ ಪಾಕವ ಕೊಳ್ಳಲಾಗದು.
ಈ ಮಾರ್ಗವನಾಚರಿಸದಿರ್ದಂಥ ಭಕ್ತನಲ್ಲಿ, ಗುರುಚರಮೂರ್ತಿಗಳು,
ಅವನ ಮನೆಯ ಹೊಕ್ಕು, ಲಿಂಗಾರ್ಚನೆ ಲಿಂಗಾರ್ಪಣವ ಮಾಡಲಾಗದು.
ಗುರುವಾಕ್ಯವ ಮೀರಿ, ಅರ್ಥದಿಚ್ಫೆಗೆ ಹೊಕ್ಕು ಬೆರಸಿದಡೆ,
ಅನಾದಿ ಗುರುಲಿಂಗಜಂಗಮ ಭಕ್ತಪ್ರಸಾದಕ್ಕೆ ಹೊರಗಾಗಿ,
ಅಂತ್ಯದಲ್ಲಿ ಶತಸಹಸ್ರ ವೇಳೆ ಶುನಿಸೂಕರಾದಿಗಳಲ್ಲಿ
ಬಪ್ಪುದು ತಪ್ಪದು ನೋಡಾ, ಕಲಿದೇವರದೇವ. /684 - ಶ್ರೀ ಮಡಿವಾಳ ಮಾಚಿದೇವರು

ಆನೆಯನೇರಿಕೊಂಡು ಹೋದಿರೇ ನೀವು,
ಕುದುರೆಯನೇರಿಕೊಂಡು ಹೋದಿರೇ ನೀವು,
ಕುಂಕುಮ ಕಸ್ತೂರಿಯ ಹೂಸಿಕೊಂಡು ಹೋದಿರೇ ಅಣ್ಣಾ !
ಸತ್ಯದ ನಿಲವನರಿಯದೆ ಹೋದಿರಲ್ಲಾ,
ಸದ್ಗುಣವೆಂಬ ಫಲವ ಬಿತ್ತದೆ ಬೆಳೆಯದೆ ಹೋದಿರಲ್ಲಾ !
ಅಹಂಕಾರವೆಂಬ ಸದಮದಗಜವೇರಿ
ವಿಧಿಗೆ ಗುರಿಯಾಗಿ ನೀವು ಹೋದಿರಲ್ಲಾ !
ನಮ್ಮ ಕೂಡಲಸಂಗಮದೇವನರಿಯದೆ
ನರಕಕ್ಕೆ ಭಾಜನವಾದಿರಲ್ಲಾ 1/638 ! - ಗುರು ಬಸವಣ್ಣ.

[1] ಈ ತರಹದ ಸಂಖ್ಯೆಯ ವಿವರ: ಸವಸ-1/554 :- ಸಮಗ್ರ ವಚನ ಸಂಪುಟ -1, ವಚನ ಸಂಖ್ಯೆ-554 (೧೫ ಸಮಗ್ರ ವಚನ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು)

ಪರಿವಿಡಿ (index)
ವಚನ ಮತ್ತು ವಚನಕಾರರು :👈 👉:ವಚನ ಸಾಹಿತ್ಯ Vachana Sahitya